ಉಡುಪಿ:
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಹಾಗೂ ವಾಕ್ಚಾತುರ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ 'ಯುವ ಸಂಸತ್ತು' ಸಭೆಗೆ ಸೆಪ್ಟೆಂಬರ್ 15 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವ ಸಂಸತ್ತು ಕಾರ್ಯಕ್ರಮದ ಪ್ರಮುಖ ವೇಳಾಪಟ್ಟಿ ಹಾಗೂ ನಿಯಮಗಳು:
ಸೆಪ್ಟೆಂಬರ್ 15:
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಂದು ಚಾಲನೆ ನೀಡಲಾಗುವುದು.
ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು.
ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 10:
ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಪರ್ಧೆಗಳು ಆರಂಭಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲಿವೆ.
ಅಕ್ಟೋಬರ್ 11 ರಿಂದ 30:
ಪ್ರತಿ ತಾಲೂಕಿನಿಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಒಳಗೊಂಡು ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಗಳು ಜರುಗಲಿವೆ.
ರಾಜ್ಯ ಮಟ್ಟದ ಸ್ಪರ್ಧೆ (ನವೆಂಬರ್ 26):
ಜಿಲ್ಲಾ ಮಟ್ಟದ ಚರ್ಚೆಯಲ್ಲಿ ಅತ್ಯುತ್ತಮ ಪ್ರತಿಭೆ ತೋರುವ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗುತ್ತದೆ. ಸಂವಿಧಾನ ದಿನಾಚರಣೆಯಾದ ನವೆಂಬರ್ 26 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಯುವ ಸಂಸತ್ ಸಭೆ ನಡೆಯಲಿದೆ.
ಅಚ್ಚುಕಟ್ಟಾದ ನಿರ್ವಹಣೆಗೆ ಅಧಿಕಾರಿಗಳಿಗೆ ಸೂಚನೆ
ಪ್ರಜಾಪ್ರಭುತ್ವ ತತ್ವಗಳ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೇ ಮಾದರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಂಸತ್ತು ಅಥವಾ ವಿಧಾನಸಭೆಯ ಮಾದರಿಯಲ್ಲೇ ಸುಸಜ್ಜಿತವಾಗಿ ಸಭಾಂಗಣವನ್ನು ಸಿದ್ಧಪಡಿಸಿ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು. ಸರ್ಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಈ ಕಾರ್ಯಕ್ರಮವನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಮಹತ್ವದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರು ಹಾಗೂ ಇ.ಓಗಳು ಉಪಸ್ಥಿತರಿದ್ದರು.


