ಬಳ್ಳಾರಿ:
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಬಹುದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಆಂತರಿಕವಾಗಿ ಶೇಕಡಾ 7ರಷ್ಟು ಮೀಸಲಾತಿ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ‘ಪ್ರಜಾಸೇವಾ ಇಲಾಖೆ ಹಾಗೂ ಆಡಳಿತ ವಿಕೇಂದ್ರೀಕರಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಈ ಮಹತ್ವದ ವಿಷಯವನ್ನು ತಿಳಿಸಿದರು.
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಈ ಆಂತರಿಕ ಮೀಸಲಾತಿಯ ಸಂಪೂರ್ಣ ರೂಪುರೇಷೆಗಳನ್ನು ಶೀಘ್ರದಲ್ಲೇ ಸರ್ಕಾರದ ವತಿಯಿಂದ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಸ್ಪಷ್ಟಪಡಿಸಿದರು.
‘ನನ್ನನ್ನು ನಾಡಿನ ದೊರೆ ಅನ್ನಬೇಡಿ, ಪ್ರಜಾಸೇವಕ ಎನ್ನಿ!’
ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಡಿಸಿಎಂ, "ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಲು ಅಧಿಕಾರಿಗಳು ಕಚೇರಿಗಳಲ್ಲೇ ಕುಳಿತುಕೊಳ್ಳಬಾರದು. ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು" ಎಂದರು.
ಮುಂದುವರಿದು ಮಾತನಾಡಿದ ಅವರು, "ಪ್ರಜಾಪ್ರಭುತ್ವದಲ್ಲಿ ರಾಜ್ಯದ ಜನತೆ ನಮ್ಮನ್ನು 136 ಸ್ಥಾನಗಳಲ್ಲಿ ಗೆಲ್ಲಿಸಿ ಅಧಿಕಾರ ನೀಡಿದ್ದಾರೆ. ರಾಜ-ದೊರೆಗಳ ಆಡಳಿತ ಕಾಲ ಮುಗಿದಿದ್ದು, ಈಗ ಪ್ರಜೆಗಳೇ ನಿಜವಾದ ಪ್ರಭುಗಳು. ಹೀಗಾಗಿ ನನ್ನನ್ನು ‘ನಾಡಿನ ದೊರೆ’ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆಯಿರಿ" ಎಂದು ಮನವಿ ಮಾಡಿದರು. 'ಬಾಗಿಲಿಗೆ ಬಂದಿದೆ ನಿಮ್ಮ ಸರ್ಕಾರ, ಸೇವೆಗಿರಲಿ ನಿಮ್ಮ ಸಹಕಾರ' ಎಂಬ ಆಶಯದೊಂದಿಗೆ ಸರ್ಕಾರದ ಯೋಜನೆಗಳು ಸಾರ್ವಜನಿಕರನ್ನು ತಲುಪಲಿವೆ ಎಂದರು.
ಜನರ ಅರ್ಜಿಗಳಿಗೆ ಸಿಗಲಿದೆ ತಕ್ಷಣದ ಪರಿಹಾರ:
ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಾರ್ವಜನಿಕರ ಕಷ್ಟವನ್ನು ತಪ್ಪಿಸಲು 'ಪ್ರಜಾಸೇವಾ' ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಇಲ್ಲಿ ಕೇವಲ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸುವುದು ಮಾತ್ರವಲ್ಲದೆ, ಆ ಸಮಸ್ಯೆಗೆ ಸಂಪೂರ್ಣ ಪರಿಹಾರ ಸಿಗುವವರೆಗೂ ಸರ್ಕಾರ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಅಭಯ ನೀಡಿದರು.
ಕಾನೂನು ಹೋರಾಟ ನಡೆಸಲು ಬಡವರಿಗೆ ಆರ್ಥಿಕ ಶಕ್ತಿಯಿಲ್ಲದಿದ್ದರೆ, ಸರ್ಕಾರವೇ ಸ್ವತಃ ವಕೀಲರನ್ನು ಒದಗಿಸಿ ನ್ಯಾಯ ಕೊಡಿಸಲಿದೆ. ಇದರ ಜೊತೆಗೆ ಕಂದಾಯ ಇಲಾಖೆಯ 'ಹಕ್ಕುಪತ್ರ ನೀಡಿಕೆ' ಹಾಗೂ 'ಭೂಮಿ ಗ್ಯಾರಂಟಿ' ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ವಿವರಿಸಿದರು.
4 ಲಕ್ಷಕ್ಕೂ ಹೆಚ್ಚು ಶಿಕ್ಷಕರಿಗೆ ವಿಶೇಷ ಗೌರವ ಹಾಗೂ ಪ್ರತಿ ಶನಿವಾರ ‘ಗ್ರಾಮ ಭೇಟಿ’:
ಶಿಕ್ಷಕರಿಗೆ ಗೌರವ:
ರಾಜ್ಯದ 4 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ವಿಶೇಷ ಬಿರುದು ಹಾಗೂ ಗೌರವ ಸಮರ್ಪಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಗ್ರಾಮ ಭೇಟಿ:
ಪ್ರತಿ ಶನಿವಾರ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮ ಹಾಗೂ ಪಂಚಾಯಿತಿ ಮಟ್ಟಕ್ಕೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಬೇಕು.
ಯುವಕ ಸಂಘ:
ಯುವ ನಾಯಕತ್ವವನ್ನು ತಳಮಟ್ಟದಲ್ಲಿ ಬೆಳೆಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದಲ್ಲಿ ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ಸ್ಥಾಪಿಸಲಾಗುವುದು.
ಮತ್ತೆ 50 ತಾಲೂಕುಗಳು ಬರಪೀಡಿತ ಎಂದು ಘೋಷಣೆ..?
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ಉಲ್ಲೇಖಿಸಿದ ಡಿ.ಕೆ. ಶಿವಕುಮಾರ್, ಈಗಾಗಲೇ ಮೊದಲ ಹಂತದಲ್ಲಿ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ.
ಶೀಘ್ರದಲ್ಲೇ ಮತ್ತೊಂದು ಹಂತದಲ್ಲಿ ಸುಮಾರು 50 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವ ನಿರೀಕ್ಷೆಯಿದೆ ಎಂದರು. ಬರ ವೀಕ್ಷಣೆಗೆ ಹೆಲಿಕಾಪ್ಟರ್ ಬಳಕೆ ಮಾಡಿದ್ದಕ್ಕೆ ಬಿಜೆಪಿ ಮಾಡುತ್ತಿರುವ ಟೀಕೆಗಳಿಗೆ ತಿರುಗೇಟು ನೀಡಿದ ಅವರು, "ನಮ್ಮ ಸರ್ಕಾರ ಕಣ್ಣುಮುಚ್ಚಿ ಕುಳಿತಿಲ್ಲ, ಸಂಕಷ್ಟದಲ್ಲಿರುವ ಜನರ ನೆರವಿಗೆ ತಕ್ಷಣ ಸ್ಪಂದಿಸುತ್ತಿದೆ" ಎಂದು ಸಮರ್ಥಿಸಿಕೊಂಡರು.


